PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ. ; ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಚುನಾವಣೆ ನಿಮಿತ್ಯ ನೀತಿ ಸಂಹಿತೆಯು ಜಾರಿಯಾಗಿದೆ. ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.
ಜಿ.ಪಂ. ಮತ್ತು ತಾ.ಪಂ. ಚುನಾವಣೆಯ ನಿಮಿತ್ತ ನೀತಿ ಸಂಹಿತೆಯು ಜ. ೦೫ ರವರೆಗೆ ಜಾರಿಯಲ್ಲಿರುತ್ತದೆ. ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯ ಪ್ರದೇಶಗಳಿಗೂ ಸಹ ನೀತಿ ಸಂಹಿತೆ ಅನ್ವಯವಾಗುತ್ತದೆ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಒದಗಿಸಲಾಗಿರುವ ಸರ್ಕಾರಿ ವಾಹನಗಳನ್ನು ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಜಿಲ್ಲಾಧಿಕಾರಿಗಳ ವಶದಲ್ಲಿರಿಸಿಕೊಳ್ಳಲಾಗುವುದು. ಆದರೆ ವಿಧಾನಮಂಡಲ ಮತ್ತು ಸಂಸತ್ ಸದಸ್ಯರುಗಳಿಗೆ ಜಿಲ್ಲಾ ಅಥವಾ ತಾಲೂಕು ಮಟ್ಟದಲ್ಲಿ ಕರ್ತವ್ಯ ನಿರ್ವಹಣೆಗೆ ಒದಗಿಸಲಾಗಿರುವ ವಾಹನವನ್ನು ಜಿಲ್ಲಾಧಿಕಾರಿಗಳು ವಶಕ್ಕೆ ತೆಗೆದುಕೊಳ್ಳುವ ಅಗತ್ಯವಿರುವುದಿಲ್ಲ. ಆದರೆ ಚುನಾವಣಾ ಪ್ರಚಾರ ಅಥವಾ ಈ ಸಂಬಂಧದ ಸಭೆ ನಡೆಸಲು ಸರ್ಕಾರಿ ವಾಹನವನ್ನು ಬಳಸಿದಲ್ಲಿ ಅವುಗಳನ್ನು ತಕ್ಷಣ ವಶಪಡಿಸಿಕೊಳ್ಳಲಾಗುವುದು. ಪಂಚಾಯತಿಗಳು ಚುನಾವಣಾ ಪೂರ್ವದಲ್ಲಿ ಪ್ರಾರಂಭಿಸಿರುವ/ಜಾರಿಯಲ್ಲಿರುವ ಕಾಮಗಾರಿಗಳ ಸಂಬಂಧ ಹಣವನ್ನು ಪಾವತಿ ಮಾಡಲು ನೀತಿ ಸಂಹಿತೆಯ ಅಡ್ಡಿರುವುದಿಲ್ಲ. ಆದರೆ ಪಂಚಾಯತಿಗಳು ಯಾವುದೇ ಹೊಸ ಕಾಮಗಾರಿಗಳನ್ನು ನಿರ್ಧರಿಸಲಾಗಿದೆ ಎಂಬ ಕಾರಣ ನೀಡಿ ಪ್ರಾರಂಭಿಸುವಂತಿಲ್ಲ. ಜಿಲ್ಲಾ ಮಟ್ಟದಲ್ಲಿ ಮಂತ್ರಿಗಳು ಅಥವಾ ಶಾಸಕರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ. ಸಭೆ ಅಥವಾ ಇತರೆ ಸಭೆಗಳನ್ನು ನಡೆಸುವಂತಿಲ್ಲ. ಬರಪೀಡಿತ ಪ್ರದೇಶದಲ್ಲಿ ಕುಡಿಯುವ ನೀರನ್ನು ಅಥವಾ ಕುಡಿಯುವ ನೀರಿನ ಯೋಜನೆಯಡಿ ಕಾಮಗಾರಿಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಬಹುದಾಗಿದೆ. ಆದರೆ ಯೋಜನೆ ಅನುಷ್ಠಾನವನ್ನು ಸಾರ್ವಜನಿಕ ಸಮಾರಂಭ ಅಥವಾ ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿ ಕ ಸಭೆ, ಸಮಾರಂಭಗಳನ್ನು ನಡೆಸಲು ನೀತಿ ಸಂಹಿತೆಯ ಅಡ್ಡಿಲ್ಲ. ಆದರೆ ಇಂತಹ ಸಭೆ ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ನೀಡುವಂತಿಲ್ಲ. ನೇಮಕಾತಿ ನಿಯಮಗಳನ್ವಯ ಯಾವುದೇ ನೇಮಕಾತಿ ಪ್ರಕ್ರಿಯೆ ಈಗಾಗಲೆ ಪ್ರಾರಂಭಗೊಂಡಿದ್ದರೆ ಅದನ್ನು ನಿಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ ನೇಮಕಾತಿಯನ್ನು ಈ ಸಮಯದಲ್ಲಿ ಅಂತಿಮಗೊಳಿಸಿ ನೇಮಕಾತಿ ಪ್ರಕಟಗೊಳಿಸುವಂತಿಲ್ಲ. ಜಿಲ್ಲಾ, ತಾಲೂಕು ಮಟ್ಟದಲ್ಲಿ ಪಡಿತರ ಚೀಟಿ ವಿತರಣೆ, ಗ್ರಾಮೀಣ ಭಾಗಗಳಿಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಂತಹ ವಿಷಯಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಭೆಗಳನ್ನು ಸಚಿವರು, ಶಾಸಕರು, ಅಧಿಕಾರಿಗಳು ನಡೆಸುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಮಂತ್ರಿಗಳು, ಶಾಸಕರು ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿ, ಮತದಾರರನ್ನು ಪ್ರಭಾವಿಸುವಂತಹ ಸಮಾರಂಭ ನಡೆಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆಯುವಂತಿಲ್ಲ. ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ರಾಜಕೀಯ ಮುಖಂಡರ ಭಾವಚಿತ್ರಗಳನ್ನೊಳಗೊಂಡ ಭಿತ್ತಿಪತ್ರ, ಬ್ಯಾನರ್, ಕಟೌಟ್, ಬೋರ್ಡ್ ಇತ್ಯಾದಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸುವಂತಿಲ್ಲ. ನೀತಿ ಸಂ"ತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗ ಆಯಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

Advertisement

0 comments:

Post a Comment

 
Top