PLEASE LOGIN TO KANNADANET.COM FOR REGULAR NEWS-UPDATES



   ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ವಿಫಲಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ.  ರೈತರು ಸಂಕಷ್ಟದಲ್ಲಿರುವುದರಿಂದ ಅವರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲು ಮಾಡುವಂತಿಲ್ಲ, ಬದಲಿಗೆ ಹೊಸ ಸಾಲ ನೀಡಲು ಅಗತ್ಯ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಜಿಲ್ಲಾಡಳಿತ ಮತ್ತು ಜಲಸಂಪನ್ಮೂಲ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಿರೇಹಳ್ಳ ಯೋಜನೆಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಅಡಿ ಶಿರೂರು, ಮುತ್ತಾಳ, ವೀರಾಪುರ ಮತ್ತು ಮುದ್ಲಾಪುರ ಗ್ರಾಮದವರಿಗೆ ಹಕ್ಕುಪತ್ರ ಮತ್ತು ಪರಿಹಾರ ಧನ ವಿತರಣೆಗಾಗಿ ಬುಧವಾರ ಯಲಬುರ್ಗಾ ತಾಲೂಕು ಶಿರೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ, ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
  ರಾಜ್ಯದಲ್ಲಿ ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ವಿಫಲಗೊಂಡ ಕಾರಣ ರಾಜ್ಯದ ೧೭೫ ತಾಲೂಕುಗಳ ಪೈಕಿ ೧೨೩ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.  ಬರಪೀಡಿತ ತಾಲೂಕುಗಳ ರೈತರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲು ಮಾಡಬಾರದು, ಬದಲಿಗೆ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಹೊಸ ಸಾಲ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಮುಂಗಾರು ಹಂಗಾಮಿಗಾಗಿ ಅಗತ್ಯವಿರುವ ಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಈಗಿನಿಂದಲೇ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಟ್ಟುಕೊಂಡು, ರೈತರಿಗೆ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಬೇಕು.  ಕೊಪ್ಪಳ ಜಿಲ್ಲೆಯಲ್ಲಿ ಮಳೆ ವೈಫಲ್ಯದಿಂದ ಸುಮಾರು ೨೦೦ ಕೋಟಿ ರೂ.ಗಳಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ.  ಜಿಲ್ಲೆಯಲ್ಲಿ ಕೈಗೊಂಡಿರುವ ಬರ ಪರಿಹಾರ ಕಾಮಗಾರಿಗಳು ತೃಪ್ತಿಕರವಾಗಿದೆ.  ಬರ ಪರಿಹಾರ ಕಾಮಗಾರಿಗಳ ಬಗ್ಗೆ ನಿಗಾ ವಹಿಸಲು ಹೋಬಳಿಗೊಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿ, ವಾರಕ್ಕೊಮ್ಮೆ ಪರಿಶೀಲನಾ ಸಭೆ ನಡೆಸಬೇಕು.  ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟ್ರಾನ್ಸ್‌ಫಾರ‍್ಮರ್‌ಗಳನ್ನು ಬದಲಾಯಿಸಿ : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆ ಸಮರ್ಪಕವಾಗಿಲ್ಲ, ಟ್ರಾನ್ಸ್‌ಫಾರ‍್ಮರ್‌ಗಳು ಸುಟ್ಟುಹೋದಲ್ಲಿ, ಅದನ್ನು ಬದಲಾಯಿಸಲು ಸುಮಾರು ೧೫ ರಿಂದ ೨೦ ದಿನಗಳನ್ನು ತೆಗೆದುಕೊಳ್ಳುತ್ತಿರುವುದರಿಂದ, ಗ್ರಾಮೀಣ ಪ್ರದೇಶದ ಜನರಿಗೆ ತೀವ್ರ ತೊಂದರೆಯಾಗಿದೆ.  ಹೆಚ್ಚುವರಿ ಟ್ರಾನ್ಸ್‌ಫಾರ‍್ಮರ್‌ಗಳನ್ನು ದಾಸ್ತಾನು ಇಟ್ಟುಕೊಳ್ಳಲು ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಂಸದ ಶಿವರಾಮಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.  ಜಿಲ್ಲೆಯಲ್ಲಿ ಇತ್ತೀಚೆಗೆ ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿತದಿಂದ ಸುಮಾರು ೫೯ ಟ್ರಾನ್ಸ್‌ಫಾರ‍್ಮರ್‌ಗಳು ಸುಟ್ಟುಹೋಗಿದ್ದು, ೧೩೯ ವಿದ್ಯುತ್ ಕಂಬಗಳು ಬಿದ್ದುಹೋಗಿವೆ ಎಂದು ಜೆಸ್ಕಾಂ ಕಾರ್ಯಪಾಲಕ ಅಭಿಯಂತರರು ಸಭೆಗೆ ವಿವರಿಸಿದರು.  ಮುಖ್ಯಮಂತ್ರಿಗಳು ಮಾತನಾಡಿ, ಜಿಲ್ಲೆಯಲ್ಲಿ ಟ್ರಾನ್ಸ್‌ಫಾರ‍್ಮರ್‌ಗಳ ದುರಸ್ತಿಗಾಗಿ ಎರಡು ಕೇಂದ್ರಗಳಿದ್ದು, ಸುಟ್ಟುಹೋದವುಗಳನ್ನು ಶೀಘ್ರ ದುರಸ್ತಿ ಮಾಡಿಸಬೇಕು.  ಹೊಸ ಟ್ರಾನ್ಸ್‌ಫಾರ‍್ಮರ್‌ಗಳನ್ನು ಖರೀದಿಸಬೇಕಿದ್ದಲ್ಲಿ, ಅಗತ್ಯವಿರುವ ಅನುದಾನವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಆಲಿಕಲ್ಲು ಮಳೆಯಿಂದ ಬೆಳೆ ಹಾನಿಗೆ ಪರಿಹಾರ : ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ಕೆಲವೆಡೆ ಆಲಿಕಲ್ಲು ಮಳೆಯಿಂದ ಭತ್ತ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾದ ಬಗ್ಗೆ ವರದಿ ಬಂದಿದ್ದು, ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಪಡೆದು, ಸಂಬಂಧಪಟ್ಟವರಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಉದ್ಯೋಗಖಾತ್ರಿಯಲ್ಲಿ ಕೆರೆ ಹೂಳೆತ್ತಿಸಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು ೧೫ ಕೋಟಿ ರೂ. ಅನುದಾನ ಲಭ್ಯವಿದ್ದು, ಈ ಅನುದಾನದಲ್ಲಿ ಕೆರೆಗಳ ಹೂಳೆತ್ತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಇದರಿಂದ ಮುಂಬರುವ ಮಳೆಗಾಲದಲ್ಲಿ ಕೆರೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಭರ್ತಿಯಾಗಲಿದ್ದು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಅಲ್ಲದೆ, ಅಂತರ್ಜಲ ಮಟ್ಟವನ್ನು ಸಹ ಹೆಚ್ಚಿಸಲು ಪೂರಕವಾಗಲಿದೆ.  ಆದಷ್ಟು ಶೀಘ್ರ ಈ ಕಾರ್ಯ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆ : ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.  ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.  ರಾಜ್ಯದಲ್ಲಿ ಹೆಚ್೧ ಎನ್೧ ಪ್ರಕರಣಗಳು ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಆರೋಗ್ಯ ಅಧಿಕಾರಿಗಳು ಜಾಗ್ರತರಾಗಿರಬೇಕು.  ಅಗತ್ಯ ಪ್ರಮಾಣದಲ್ಲಿ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಬೇಕು.  ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಬಗ್ಗೆ ದೂರು ಬಂದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಿ, ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ : ಬರಪೀಡಿತ ಜಿಲ್ಲೆಗಳ ಎಲ್ಲ ಇಲಾಖೆಗಳ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರಸ್ಥಾನ ಬಿಟ್ಟು ತೆರಳುವಂತಿಲ್ಲ.  ಯಾವುದೇ ಕಾರಣಕ್ಕೂ ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಬಾರದು.  ಅಧಿಕಾರಿಗಳು ಯಾವುದೇ ಸಂದರ್ಭದಲ್ಲಿ ಸಂಪರ್ಕಕ್ಕೆ ಸಿಗುವಂತಿರಬೇಕು.  ಒಂದು ವೇಳೆ ಈ ಕುರಿತಂತೆ ಯಾವುದೇ ಜನಪ್ರತಿನಿಧಿಗಳಿಂದ ದೂರು ಬಂದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.  ಅಧಿಕಾರಿಗಳು ಬರ ಪರಿಸ್ಥಿತಿ ತಿಳಿಯಾಗುವವರೆಗೂ ವಿಶ್ರಾಂತಿ ಬಯಸಬೇಡಿ, ಪರಿಸ್ಥಿತಿ ಸುಧಾರಣೆಯಾಗುವವರೆಗೆ ಜನರೊಂದಿಗೆ ಬೆರೆತು, ಅವರ ಸಂಕಷ್ಟಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಮಾತನಾಡಿ, ಜಿಲ್ಲೆಯಲ್ಲಿ ಮಳೆಯ ವೈಪಲ್ಯದಿಂದ ಸುಮಾರು ೨೦೦ ಕೋಟಿ ರೂ.ಗಳ ಅಂದಾಜು ಬೆಳೆ ಹಾನಿಯಾಗಿದೆ.  ಜಿಲ್ಲೆಯಲ್ಲಿ ಸುಮಾರು ೩. ೨೫ ಲಕ್ಷ ಜಾನುವಾರುಗಳಿದ್ದು, ಸದ್ಯ ೧೨ ಗೋಶಾಲೆಗಳನ್ನು ಪ್ರಾರಂಭಿಸಲಾಗಿದೆ.  ಸದ್ಯ ಈ ಗೋಶಾಲೆಗಳಲ್ಲಿ ಒಟ್ಟು ೫೦೦೦ ಜಾನುವಾರುಗಳಿವೆ.  ಶಾಸಕರು ಸೂಚಿಸುವ ಸ್ಥಳದಲ್ಲಿ ಇನ್ನಷ್ಟು ಗೋಶಾಲೆ ಪ್ರಾರಂಭಕ್ಕೆ ಜಿಲ್ಲಾಡಳಿತ ಸಿದ್ಧವಿದೆ.  ಜಿಲ್ಲೆಯಲ್ಲಿ ೪೦೦ ಟನ್ ಮೇವು ಸಂಗ್ರಹಿಸಲಾಗಿದ್ದು, ಸದ್ಯ ಭತ್ತದ ಬೆಳೆ ಕಟಾವು ನಡೆಯುತ್ತಿರುವುದರಿಂದ ಇನ್ನಷ್ಟು ಮೇವು ಸಂಗ್ರಹ್ಕೆ ಕ್ರಮ ಕೈಗೊಳ್ಳಲಾಗಿದೆ.  ಜಿಲ್ಲೆಯಲ್ಲಿ ಸದ್ಯ ಒಟ್ಟು ೧೦೬ ಹೊಸ ಕೊಳವೆಬಾವಿಗಳನ್ನು ಕೊರೆಯಿಸಲಾಗಿದ್ದು, ಕುಡಿಯುವ ನೀರಿನ ೩೫೫ ಕಾಮಗಾರಿಗಳಿಗೆ ೬. ೪೮ ಕೋಟಿ ರೂ. ಕ್ರಿಯಾ ಯೋಜನೆ ಮಾಡಲಾಗಿದೆ.  ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳ ಕುಡಿಯುವ ನೀರಿನ ಕಾಮಗಾರಿಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ.  ಜಿಲ್ಲೆಯಲ್ಲಿ ಸದ್ಯ ೩. ೨೦ ಕೋಟಿ ರೂ. ಹಣದ ಲಭ್ಯತೆ ಇದ್ದು, ಇನ್ನೂ ೭. ೫ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ಮಾತನಾಡಿ, ೨೦೧೧-೧೨ ನೇ ಸಾಲಿನ ಉದ್ಯೋಗಖಾತ್ರಿ ಯೋಜನೆಯಡಿ ಸುಮಾರು ೧೮ ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಿ, ೨೦ ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ.  ೭೫ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದುವರೆಗೆ ೪೮ ಕೋಟಿ ರೂ. ಅನುದಾನ ಖರ್ಚಾಗಿದೆ ಎಂದರು.
  ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಸಂಸದ ಶಿವರಾಮಗೌಡ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಶಾಸಕರುಗಳಾದ ಕರಡಿ ಸಂಗಣ್ಣ, ಅಮರೇಗೌಡ ಪಾಟೀಲ್ ಬಯ್ಯಾಪುರ, ಈಶಣ್ಣ ಗುಳಗಣ್ಣವರ್, ಪರಣ್ಣ ಮುನವಳ್ಳಿ, ಶಿವರಾಜ್ ಎಸ್ ತಂಗಡಗಿ, ಹಾಲಪ್ಪ ಆಚಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಉಪಾಧ್ಯಕ್ಷೆ ಸೀತಾ ಹಲಗೇರಿ ಸೇರಿದಂತೆ ಜಿ.ಪಂ. ಸದಸ್ಯರು, ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಕೊಪ್ಪಳ ನಗರಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top