PLEASE LOGIN TO KANNADANET.COM FOR REGULAR NEWS-UPDATES

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿ ಸಂತಸ ತಂದಿದೆ- ಶಿವರಾಜ ತಂಗಡಗಿ



: ಉತ್ತರ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗಿರುವುದು ಅತ್ಯಂತ ಸಂತಸವನ್ನುಂಟು ಮಾಡಿದ್ದು, ನೀರನ್ನು ಸದ್ಬಳಕೆ ಮಾಡಿಕೊಂಡು ರೈತರು ತಮ್ಮ ಬಾಳು ಹಸನಾಗಿಸಿಕೊಳ್ಳಲಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಶುಭ ಹಾರೈಸಿದರು.
  ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
  ತುಂಗಭದ್ರಾ ನದಿ ಪಾತ್ರದ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಈ ಬಾರಿ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗಿರುವುದು ಎಲ್ಲರಿಗೂ ಸಂತಸಕರ ಸಂಗತಿಯಾಗಿದೆ.  ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಳೆದ ಜು. ೯ ರಿಂದಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಲಾಗಿದ್ದು, ರೈತರಿಗೂ ಸಂತಸವನ್ನುಂಟುಮಾಡಿದೆ.  ರೈತರು ನೀರನ್ನು ವ್ಯರ್ಥವಾಗಿಸದೆ, ಸದುಪಯೋಗಪಡಿಸಿಕೊಳ್ಳಬೇಕು. ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಾ ಸಾಮರ್ಥ್ಯ ೧೩೨ ಟಿ.ಎಂ.ಸಿ. ಆಗಿದ್ದು, ಆದರೆ ಸುಮಾರು ೩೨ ಟಿ.ಎಂ.ಸಿ. ಪ್ರಮಾಣದ ಹೂಳು ಜಲಾಶಯದ ಒಡಲನ್ನು ಸೇರಿರುವುದರಿಂದ, ನೀರಿನ ಸಂಗ್ರಹ ಕೇವಲ ೧೦೦ ಟಿ.ಎಂ.ಸಿ.ಗೆ ಕುಸಿದಿದೆ.  ಹೂಳಿನ ಸಮಸ್ಯೆ ನಿವಾರಣೆಗೆ ಪ್ರವಾಹ ಕಾಲುವೆ ಅಥವಾ ಸಮಾನಾಂತರ ಜಲಾಶಯಗಳ ನಿರ್ಮಾಣವೂ ಸೇರಿದಂತೆ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ತಜ್ಞರ ಸಮಿತಿಯ ಸಲಹೆ, ಸೂಚನೆಗಳನ್ನು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಕಳೆದ ವಾರ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರೊಂದಿಗೆ ಈ ಭಾಗದ ಎಲ್ಲ ಜನಪ್ರತಿನಿಧಿಗಳು, ತಜ್ಞರು, ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು, ಅದರಂತೆ ಇನ್ನು ೦೬ ತಿಂಗಳಲ್ಲಿ ತಜ್ಞರ ವರದಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಹೇಳಿದರು.
  ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯಕ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ ಸೇರಿದಂತೆ ವಿವಿಧ ಗಣ್ಯರು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.  ತುಂಗಭದ್ರಾ ಯೋಜನಾ ವೃತ್ತದ ಮುಖ್ಯ ಅಭಿಯಂತರ ಮಲ್ಲಿಕಾರ್ಜುನ, ಅಧೀಕ್ಷಕ ಅಭಿಯಂತರ ಎಚ್.ಎಸ್. ಮಂಜಪ್ಪ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಸಹಾಯಕ ಆಯುಕ್ತ ಮಂಜುನಾಥ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top