PLEASE LOGIN TO KANNADANET.COM FOR REGULAR NEWS-UPDATES

 : ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಅ. ೧೮ ರಂದು ಜಿಲ್ಲಾ ಕೇಂದ್ರದಲ್ಲಿ ಭಕ್ತಿ ಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಹೇಳಿದರು.
  ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಇದೇ ಅಕ್ಟೋಬರ್ ೧೮ ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುವುದು.  ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ಕೊಪ್ಪಳದ ಶಿರಸಪ್ಪಯ್ಯನಮಠದಿಂದ ಪ್ರಾರಂಭಗೊಂಡು ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಸಾಹಿತ್ಯ ಭವನ ತಲುಪಲಾಗುವುದು.   ಈ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಈ ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು. ಮೆರವಣಿಗೆಯು ಜವಾಹರ ರಸ್ತೆಯಿಂದ ಸಾಹಿತ್ಯ ಭವನಕ್ಕೆ ಮಧ್ಯಾಹ್ನ ೧೨ ಗಂಟೆಗೆ ತಲುಪಲಿದೆ.  ನಂತರ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ.  ಮಹರ್ಷಿ ವಾಲ್ಮೀಕಿಯವರ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು.  ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿರುವುದರಿಂದ, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಗ್ರಾಮ ಪಂಚಾಯತಿ, ತಾಲೂಕಾ ಪಂಚಾಯತಿ ಕಚೇರಿಗಳಲ್ಲಿ ಕಡ್ಡಾಯವಾಗಿ ವಾಲ್ಮೀಕಿ ಜಯಂತಿ ಆಚರಿಸಬೇಕು.  ಸಾರ್ವಜನಿಕರು, ಸಂಘಟನೆಗಳ ಪದಾಧಿಕಾರಿಗಳು ಶಾಂತಿಯನ್ನು ಕಾಪಾಡಿಕೊಂಡು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು  ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಮನವಿ ಮಾಡಿದರು.
  ವಾಲ್ಮೀಕಿ ಜಯಂತಿ ಅಂಗವಾಗಿ ಅಂದು ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಉಪನ್ಯಾಸಕ ಡಿ.ಕೆ. ಮಾಳೆ ಅವರನ್ನು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡುವಂತೆ ಆಹ್ವಾನಿಸಲು ನಿರ್ಧರಿಸಲಾಯಿತು.  ಅಲ್ಲದೆ ಈ ಸಮಾರಂಭದ ವೇದಿಕೆಗೆ ಹಕ್ಕು-ಬುಕ್ಕ ವೇದಿಕೆ ಎಂದು ಹೆಸರಿಸಲು ತೀರ್ಮಾನಿಸಲಾಯಿತು.
  ವಾಲ್ಮೀಕಿ ಸಮಾಜದ ಎಲ್ಲ ಮುಖಂಡರು ಕೊಪ್ಪಳದಲ್ಲಿ ನಿರ್ಮಿಸಲಾಗುತ್ತಿರುವ ಮಹರ್ಷಿ ವಾಲ್ಮೀಕಿ ಭವನವನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.  ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ವಾಲ್ಮೀಕಿ ಜಯಂತಿ ಆಚರಣೆ ಕುರಿತು ಸಮಗ್ರ ವಿವರಣೆ ನೀಡಿದರು.
  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಉಪವಿಭಾಗಾಧಿಕಾರಿ ಮಂಜುನಾಥ್, ತಾ.ಪಂ. ಅಧ್ಯಕ್ಷ ದೇವಪ್ಪ ಮೇಕಾಳೆ, ಗಣ್ಯರಾದ ರಾಮಣ್ಣ ನಾಯಕ್, ಮಾಲತಿ ನಾಯಕ್, ರಾಜೇಶ್ ನಾಯಕ್, ಇಂದಿರಾ ಬಾವಿಕಟ್ಟಿ, ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ, ಲಕ್ಷ್ಮಣ್ ಸೇರಿದಂತೆ ಅನೇಕ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advertisement

0 comments:

Post a Comment

 
Top