PLEASE LOGIN TO KANNADANET.COM FOR REGULAR NEWS-UPDATES



ಸಾಂಕ್ರಾಮಿಕ ರೋಗಗಳು ಹಾಗೂ ಸೊಳ್ಳೆಗಳ ಮೂಲಕ ಹರಡುವ ರೋಗಗಳ ನಿಯಂತ್ರಣದ ಬಗ್ಗೆ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಮಳೆಗಾಲ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳು ಹಾಗೂ ಸೊಳ್ಳೆಗಳ ಮೂಲಕ ಹರಡುವ ಮಾರಣಾಂತಿಕ ರೋಗಗಳು ಇದೇ ಅವಧಿಯಲ್ಲಿ ಹೆಚ್ಚು ಹರಡುವ ಸಾಧ್ಯತೆಗಳಿರುತ್ತವೆ.  ರೋಗಗಳಿಗೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬಾರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಉತ್ತಮ ಮಾರ್ಗೋಪಾಯವಾಗಿದೆ.  ಈ ದಿಸೆಯಲ್ಲಿ ಶಾಲಾ ಮಟ್ಟದಲ್ಲಿ ಶಿಕ್ಷಕರು ತಮ್ಮ ಪಠ್ಯ ಬೋಧನೆಯ ಜೊತೆಗೆ, ರೋಗಗಳ ನಿಯಂತ್ರಣಕ್ಕಾಗಿ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮ ನಡೆಯಬೇಕು.  ಕಳೆದ ವರ್ಷ ಜಿಲ್ಲೆಯಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಡೆಂಗ್ಯು ಮತ್ತು ಚಿಕುನ್‌ಗುನ್ಯಾ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದ್ದವು.  ಅದರಲ್ಲೂ ಕೊಪ್ಪಳ ನಗರ ಮತ್ತು ಕುಷ್ಟಗಿ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿದ್ದವು. ಪ್ರಸಕ್ತ ವರ್ಷ ಈ ರೀತಿ ಮರುಕಳಿಸದಂತೆ, ನಗರಸಭೆಗಳು, ಪುರಸಭೆ, ಗ್ರಾಮ ಪಂಚಾಯತಿಗಳು ಹಾಗೂ ಆರೋಗ್ಯ ಇಲಾಖೆ ಎಚ್ಚರ ವಹಿಸಬೇಕು.  ಪ್ರತಿ ಹತ್ತು ದಿನಕ್ಕೊಮ್ಮೆ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಸಂಭವನೀಯ ಸೊಳ್ಳೆ ಉತ್ಪತ್ತಿ ತಾಣಗಳನ್ನು ಪತ್ತೆ ಮಾಡಿ, ಅವುಗಳ ನಿರ್ಮೂಲನೆ ಮಾಡುವ ಕಾರ್ಯ ನಿಯಮಿತವಾಗಿ ಜರುಗಬೇಕು.  ಡೆಂಗ್ಯುಜ್ವರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿ, ಬಳ್ಳಾರಿ ಮತ್ತು ಧಾರವಾಡ ಜಿಲ್ಲೆಗಳ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ದಾಖಲಾಗುವ ಡೆಂಗ್ಯು ಪ್ರಕರಣಗಳಲ್ಲಿ ಬಹುತೇಕವಾಗಿ ಕೊಪ್ಪಳ ಜಿಲ್ಲೆಯ ರೋಗಿಗಳಾಗಿರುತ್ತಾರೆ ಎಂಬುದಾಗಿ ಅಲ್ಲಿನ ಅಂಕಿ-ಅಂಶಗಳಿಂದ ತಿಳಿದು ಬರುತ್ತದೆ.  ಡೆಂಗ್ಯು ಪ್ರಕರಣ ಪತ್ತೆಗೆ ಅಗತ್ಯವಿರುವ ವ್ಯವಸ್ಥೆಯನ್ನು ಕೊಪ್ಪಳದಲ್ಲಿಯೇ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಸೂಚನೆ ನೀಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಟ್ಟಿಮನಿ ಅವರು, ಕಳೆದ ವರ್ಷದ ಅಂಕಿ-ಅಂಶಗಳ ಆಧಾರದ ಮೇಲೆ ಜಿಲ್ಲೆಯಲ್ಲಿ ೧೨೦ ಗ್ರಾಮ ಪಂಚಾಯತಿಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಇಂತಹ ಗ್ರಾಮಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಪತ್ತೆಹಚ್ಚಿ, ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ ಎಂದರು.
ಐಸ್‌ಕ್ರೀಂಗೆ ಕಳಪೆ ಗುಣಮಟ್ಟದ ನೀರು : ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಐಸ್‌ಕ್ರೀಂ ತಯಾರಿಸುವ ಘಟಕಗಗಳಿದ್ದು, ಇಂತಹ ಘಟಕಗಳಲ್ಲಿ ಕಳಪೆ ಗುಣಮಟ್ಟದ ನೀರು ಬಳಕೆಯಾಗುತ್ತಿರುವ ಸಾಧ್ಯತೆಗಳು ಹೆಚ್ಚಾಗಿದೆ.  ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ಐಸ್‌ಕ್ರೀಂ ಮಾರಾಟ ಮಾಡಲಾಗುತ್ತಿದ್ದು, ಐಸ್‌ಕ್ರೀಂ ಸೇವಿಸುವವರಲ್ಲಿ ವಾಂತಿ-ಭೇದಿ ಸೇರಿದಂತೆ ವಿವಿಧ ಸೋಂಕು ರೋಗಗಳು ಹರಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಐಸ್‌ಕ್ರೀಂ ತಯಾರಿಕಾ ಘಟಕಗಳನ್ನು ಪರಿಶೀಲಿಸಿ, ಕಳಪೆ ಗುಣಮಟ್ಟದ ನೀರು ಬಳಸುತ್ತಿರುವ ಐಸ್‌ಕ್ರೀಂ ಘಟಕಗಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕುಡಿಯುವ ನೀರು ಬಗ್ಗೆ ಎಚ್ಚರ ವಹಿಸಿ : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪೂರೈಕೆ ಮಾಡಲಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಸಾಕಷ್ಟು ಎಚ್ಚರ ವಹಿಸುವುದು ಅಗತ್ಯವಾಗಿದೆ.  ಎಲ್ಲ ಗ್ರಾಮ ಪಂಚಾಯತಿಗಳೂ, ಕನಿಷ್ಟ ೧೦ ದಿನಕ್ಕೊಮ್ಮೆ ಕುಡಿಯುವ ನೀರು ಘಟಕಗಳಲ್ಲಿ ಕ್ಲೋರಿನೇಷನ್ ಮಾಡಬೇಕು.  ಪೈಪ್‌ಲೈನ್ ಸೋರಿಕೆ ಕಂಡುಬಂದಲ್ಲಿ, ಕೂಡಲೆ ದುರಸ್ತಿಗೊಳಿಸಬೇಕು.  ಬೋರ್‌ವೆಲ್‌ಗಳ ಸುತ್ತ ಕೆಸರು ಸಂಗ್ರಹವಾಗುವುದರಿಂದ, ಕುಡಿಯುವ ನೀರು ಸಹ ಕಲುಷಿತಗೊಳ್ಳುವ ಸಂಭವ ಹೆಚ್ಚಾಗಿರುತ್ತದೆ.  ಇದನ್ನು ತಡೆಗಟ್ಟಲು, ಬೋರ್‌ವೆಲ್ ಸುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಕ್ರಮ ವಹಿಸಬೇಕು.  ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮ ಸೇರಿದಂತೆ ಲಕ್ಮಾಪುರ, ಕೋಮಲಾಪುರ ಗ್ರಾಮಗಳಲ್ಲಿ ಈ ಹಿಂದೆ ವಾಂತಿ-ಭೇದಿ ಪ್ರಕರಣ ಹೆಚ್ಚಾಗಿ ಕಂಡುಬಂದಿರುವ ಬಗ್ಗೆ ವರದಿ ಇದ್ದು, ಇಲ್ಲಿನ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪರಿಶೀಲಿಸಿ, ಸಮಸ್ಯೆ ಇದ್ದಲ್ಲಿ, ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಜಿಲ್ಲೆಯ ಬಹುತೇಕ ಶಾಲೆ ಹಾಗೂ ಅಂಗನವಾಡಿಗಳಲ್ಲಿನ ನೀರು ಸಂಗ್ರಹ ಟ್ಯಾಂಕ್‌ಗಳು ಮಲಿನವಾಗಿದ್ದು, ಇವುಗಳ ಸ್ವಚ್ಛತೆಗೆ ಆಯಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಅಂಗನವಾಡಿ ಮೇಲ್ವಿಚಾರಕರಿಗೆ ಸೂಕ್ತ ನಿರ್ದೇಶನ ನೀಡಿ, ಈ ಕುರಿತ ಪಾಲನಾ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಆರೋಗ್ಯ ಇಲಾಖೆಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಉಪಕಾರ್ಯದರ್ಶಿ ರವಿ ಬಸರಿಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಇಸ್ಮಾಯಿಲ್‌ಖಾನ್ ಸೇರಿದಂತೆ ವಿವಿಧ ವಿಭಾಗಗಳ ವೈದ್ಯಾಧಿಕರಿಗಳು, ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Advertisement

0 comments:

Post a Comment

 
Top