PLEASE LOGIN TO KANNADANET.COM FOR REGULAR NEWS-UPDATES






ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಅತ್ಯಂತ ಹಿಂದುಳಿದಿರುವ ಗೋಂದಲಿ ಸೇರಿದಂತೆ ಇತರೆ ಅಲೆಮಾರಿ ಸಮುದಾಯಕ್ಕೆ ಜಮೀನು ಮತ್ತು ವಸತಿ ಸೌಲಭ್ಯವನ್ನು ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಹೇಳಿದರು.
  ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆಯ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗೋಂದಲಿ ಜನಾಂಗದ ರಾಜ್ಯ ಮಟ್ಟದ ವಿಚಾರಸಂಕಿರಣದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ಅಲೆಮಾರಿ ಜನಾಂಗವು ಬಹುವರ್ಷಗಳಿಂದಲೂ ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯವಾಗಿದ್ದು,  ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಅತ್ಯಂತ ಹಿಂದುಳಿದಿದೆ.  ಇದೀಗ ಸರ್ಕಾರ ಇಂತಹ ಅನೇಕ ಶೋಷಿತ ಹಾಗೂ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ನ್ಯಾಯ ಒದಗಿಸಲು ತೀರ್ಮಾನಿಸಿದೆ.  ಜಾತೀವಾರು ಸಮೀಕ್ಷೆಗೆ ಈಗಾಗಲೆ ಸರ್ಕಾರ ಕೈಗೊಂಡಿದ್ದು, ಇದರಿಂದಾಗಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಜನಾಂಗಗಳ ಸ್ಥಿತಿಗತಿಗಳ ಮೇಲೆ ಸಮೀಕ್ಷಾ ವರದಿ ಬೆಳಕು ಚೆಲ್ಲಲಿದೆ.  ಈ ಸಮೀಕ್ಷಾ ವರದಿಯ ಆಧಾರದ ಮೇಲೆ ಹಿಂದುಳಿದ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ, ಅಂತಹ ಸಮುದಾಯಗಳನ್ನೂ ಮುಖ್ಯವಾಹಿನಿಗೆ ತರಲು ಕ್ರಮ ವಹಿಸಲಿದೆ.  ಅಲೆಮಾರಿ ಜನಾಂಗ, ತಮ್ಮ ಬದುಕಿಗಾಗಿ ಒಂದು ಪ್ರದೇಶದಿಂದ ಇನ್ನೊಂದು ಸ್ಥಳಕ್ಕೆ ವಲಸೆ ಹೋಗುವ ಪದ್ಧತಿಯನ್ನು ರೂಢಿಸಿಕೊಂಡಿದ್ದು, ಇದರಿಂದಾಗಿ ಆ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.  ಇಂತಹ ವಲಸೆ ಪದ್ಧತಿಯನ್ನು ಈ ಸಮುದಾಯ ಕೊನೆಗಾಣಿಸಿ, ಒಂದೆಡೆ ನೆಲೆಗೊಳ್ಳಲು ಅಗತ್ಯವಿರುವ ಜಮೀನು ಹಾಗೂ ಮನೆಗಳನ್ನು ಕಟ್ಟಿಕೊಡಲು ಸರ್ಕಾರ ಸಿದ್ಧವಿದೆ.  ಇದರಿಂದಾಗಿ ಅಂತಹ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗಲಿದೆ.  ಅಲೆಮಾರಿ ಜನಾಂಗದವರು ತಮ್ಮ ಜೀವನ ಶೈಲಿ ಹಾಗೂ ಹವ್ಯಾಸಗಳನ್ನು ಬದಲಾಯಿಸಿಕೊಳ್ಳಬೇಕು.  ಸಮುದಾಯ ಕುಡಿತದ ದುಶ್ಚಟದಿಂದ ಮುಕ್ತವಾಗಬೇಕು.  ಶೀಘ್ರದಲ್ಲೇ ಜಾತಿವಾರು ಸಮೀಕ್ಷೆ ಪ್ರಾರಂಭವಾಗಲಿದ್ದು, ಅಲೆಮಾರಿ ಜನಾಂಗದವರು, ಗಣತಿದಾರರಿಗೆ ಸೂಕ್ತ ಮಾಹಿತಿಯನ್ನು ನೀಡಿ, ಸಮೀಕ್ಷೆಗೆ ನೆರವಾಗಬೇಕು.  ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಈ ವರ್ಷ ೫೦ ಕೋಟಿ ರೂ. ಅನುದಾನವನ್ನು ಸರ್ಕಾರ ಮೀಸಲಿರಿಸಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ, ಆರ್ಥಿಕ ಚಟುವಟಿಕೆಗಳಿಗಾಗಿ ಸಹಾಯಧನ ನೀಡುತ್ತಿದೆ.  ಅಲ್ಲದೆ ಇಂತಹ ಸಮುದಾಯದ ಮಕ್ಕಳಿಗಾಗಿ ಹಾಸ್ಟೆಲ್‌ಗಳಿಗೆ ನೇರ ದಾಖಲಾತಿಗೆ ಅವಕಾಶ ಕಲ್ಪಿಸಿದೆ.  ಇಂತಹ ಯೋಜನೆಯ ಸೌಲಭ್ಯ ಪಡೆದುಕೊಂಡು, ಸಮುದಾಯ ಅಭಿವೃದ್ಧಿಯತ್ತ ಮುಂದಾಗಬೇಕು ಎಂದು ಸಚಿವ ಹೆಚ್. ಆಂಜನೇಯ ಅವರು ಕರೆ ನೀಡಿದರು.
  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ನಿರ್ಲಕ್ಷ್ಯಕ್ಕೆ ಒಳಗಾಗಿರುವ ಅಲೆಮಾರಿ ಸಮುದಾಯದ ಸಮಸ್ಯೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವುದು ಇದುವರೆಗೂ ಆಗಿರಲಿಲ್ಲ.  ಇದೀಗ ಸರ್ಕಾರ ಸಮಾಜದ ಸಮಸ್ಯೆಗಳು ಹಾಗೂ ಆಗಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಸರ್ಕಾರ ಇಂತಹ ವೇದಿಕೆ ಒದಗಿಸಿಕೊಡುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದೆ.  ಗೋಂದಲಿ ಸಮಾಜದವರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಿದೆ.  ಸಮುದಾಯದ ಕುಲಕಸುಬು ಕೌಶಲ್ಯ ವೃದ್ಧಿಗೆ ಸರ್ಕಾರ ಹೆಚ್ಚಿನ ಸಹಾಯಧನ ನೀಡಲು ಸಿದ್ಧವಿದೆ.  ಗೋಂದಲಿ ಸಮುದಾಯದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಮಟ್ಟ ಸುಧಾರಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ ಎಂದರು.
  ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಡಾ. ಬಿ.ಕೆ. ರವಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.  ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕಿ ಡಾ. ಆರ್. ಅನುರಾಧ ಪಟೇಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯು ಈಗಾಗಲೆ ಹೆಳವ, ಕಾಡುಗೊಲ್ಲ ಮುಂತಾದ ಸಮಾಜದ ಸ್ಥಿತಿಗತಿಗಳ ಮೇಲೆ ಬೆಳಕು ಚೆಲ್ಲಲು ಇಂತಹ ವಿಚಾರಸಂಕಿರಣಗಳನ್ನು ಏರ್ಪಡಿಸಿದ್ದು, ಇದೀಗ ಗೋಂದಲಿ ಸಮಾಜಕ್ಕೆ ನೈತಿಕ ಸ್ಥೈರ್ಯ, ಆರ್ಥಿಕ ಸ್ಥಿತಿ ಬಲಗೊಳಿಸುವ ನಿಟ್ಟಿನಲ್ಲಿ ಈ ವಿಚಾರಸಂಕಿರಣ ಏರ್ಪಡಿಸಲಾಗಿದೆ.  ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಸಮುದಾಯ ಮಾತ್ರ ಶೀಘ್ರ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.  ಕರ್ನಾಟಕ ರಾಜ್ಯ ಗೋಂದಲಿ ಸಮಾಜದ ರಾಜ್ಯಾಧ್ಯಕ್ಷ ಶಿವಾನಂದ ಪಾಚಂಗಿ ಅವರು ಗೋಂದಲಿ ಸಮಾಜ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯವಾಗಿ ಆಗಬೇಕಿರುವ ಕ್ರಮಗಳ ಬಗ್ಗೆ ಬೇಡಿಕೆಯನ್ನು ಸಲ್ಲಿಸಿದರು.
  ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿ.ಪಂ. ಸದಸ್ಯರುಗಳಾದ ವಿಜಯಲಕ್ಷ್ಮಿ ರಾಮಕೃಷ್ಣ, ಈರಪ್ಪ ಕುಡಗುಂಟಿ, ನಗರಸಭೆ ಸದಸ್ಯರುಗಳಾದ ಮುತ್ತು ಕುಷ್ಟಗಿ, ರಾಮಣ್ಣ ಹದ್ದಿನ, ಗಾಳೆಪ್ಪ ಪೂಜಾರ, ರೇಣುಕಾ ಪೂಜಾರ, ಜನಾಬಾಯಿ ಜಕ್ಕಲಿ, ಬಿಸಿಎಂ ಜಿಲ್ಲಾ ಅಧಿಕಾರಿ ಕಲ್ಲೇಶ್ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.  ದೇವರಾಜ ಅರಸು ಸಂಶೋಧನಾ ಸಂಸ್ಥೆ ಸಹಾಯಕ ನಿರ್ದೇಶಕ ಅಶೋಕ್ ಸ್ವಾಗತಿಸಿ, ವಂದಿಸಿದರು.

Advertisement

0 comments:

Post a Comment

 
Top