PLEASE LOGIN TO KANNADANET.COM FOR REGULAR NEWS-UPDATES



ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರುಕಳಿಸುವ ರೀತಿಯಲ್ಲಿ ಆನೆಗೊಂದಿ ಉತ್ಸವವನ್ನು ಬರುವ ಏ. ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಹೇಳಿದರು.
  ಆನೆಗೊಂದಿ ಉತ್ಸವ ಆಚರಣೆ ಸಂಬಂಧ ಗಂಗಾವತಿಯ ಐ.ಎಂ.ಎ ಸಭಾಂಗಣದಲ್ಲಿ  ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
  ಆನೆಗೊಂದಿ ಉತ್ಸವವನ್ನು ಕಳೆದ ವರ್ಷ ಆಚರಿಸಬೇಕಾಗಿತ್ತು.  ಆದರೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ಕಾರಣ ಆಚರಿಸಲು ಸಾಧ್ಯವಾಗಲಿಲ್ಲ.  ಈ ಬಾರಿ ಆನೆಗೊಂದಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು.  ವಿದ್ಯಾರ್ಥಿಗಳ ಪರೀಕ್ಷೆ, ಚುನಾವಣೆ ನೀತಿ ಸಂಹಿತೆ ಸೇರಿದಂತೆ ಎಲ್ಲ ನಿಟ್ಟಿನಲ್ಲಿ ಆಲೋಚಿಸಿ, ಏ. ೧೧, ೧೨ ರಂದು ಉತ್ಸವ ಆಚರಿಸಲು ದಿನಾಂಕ ನಿಗದಿಪಡಿಸಲಾಗಿದೆ.  ಏ. ೧೧ ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ.  ಒಂದು ವೇಳೆ ಗ್ರಾ.ಪಂ. ಚುನಾವಣೆಯ ನೀತಿ ಸಂಹಿತೆ ಜಾರಿಯಾದರೂ ಸಹ ಉತ್ಸವವನ್ನು ರದ್ದು ಮಾಡುವುದಾಗಲಿ, ಮುಂದೂಡುವುದಾಗಲಿ ಮಾಡುವುದಿಲ್ಲ. ಜನಪ್ರತಿನಿಧಿಗಳು ವೇದಿಕೆಗೆ ತೆರಳದೆ, ಅಧಿಕಾರಿಗಳ ನೇತೃತ್ವದಲ್ಲೇ ವಿಜೃಂಭಣೆಯಿಂದ ಉತ್ಸವ ಆಚರಿಸಲು ಕ್ರಮ ಕೈಗೊಳ್ಳಲಾಗುವುದು.  ಏ. ೧೧ ರಂದು ಆನೆಗೊಂದಿಯ ಶ್ರೀ ರಂಗನಾಥ ಸ್ವಾಮಿ ಜಾತ್ರೋತ್ಸವ ಇದ್ದು, ಅಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನಡೆಯಲಿದೆ. ಉತ್ಸವದ ಅಂಗವಾಗಿ ಅಂದು ಬೆಳಿಗ್ಗೆ ಅದ್ಧೂರಿ ಮೆರವಣಿಗೆ ಜರುಗಲಿದ್ದು, ಸಂಜೆ ೬ ಗಂಟೆಗೆ ಆನೆಗೊಂದಿ ಬಳಿ ನಿರ್ಮಿಸಲಾಗಿರುವ ವೇದಿಕೆಯಲ್ಲಿ ಆನೆಗೊಂದಿ ಉತ್ಸವದ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.  ಜನರಿಗೆ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಉತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಒಳ್ಳೆಯ ಅವಕಾಶ ಲಭ್ಯವಾಗಲಿದೆ.  ಏ. ೧೨ ರಂದು ಕಬಡ್ಡಿ, ಕುಸ್ತಿ ಮುಂತಾದ ಕ್ರೀಡಾಕೂಟಗಳು, ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು.  ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.  ಉತ್ಸವ ಆಚರಣೆಗೆ ಸರ್ಕಾರ ಈಗಾಗಲೆ ೬೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.  ಉತ್ಸವ ಸಂದರ್ಭದಲ್ಲಿ ಆನೆಗೊಂದಿಯ ಮುಖ್ಯದ್ವಾರ, ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ, ಸಾರ್ವಜನಿಕರ ಅನುಕೂಲಕ್ಕಾಗಿ ಹೈಮಾಸ್ಟ್ ದೀಪದ ವ್ಯವಸ್ಥೆ, ಚಿಂತಾಮಣಿ ಮಠ, ದುರ್ಗಾ ದೇವಸ್ಥಾನ ಸೇರಿದಂತೆ ಐತಿಹಾಸಿಕ ಸ್ಥಳಗಳಿಗೆ ವಿದ್ಯುತ್ ದೀಪಾಲಾಂಕಾರ.  ಕೊಪ್ಪಳ, ಹುಲಿಗಿ, ಗಂಗಾವತಿಯಿಂದ ವಿಶೇಷ ಬಸ್ ವ್ಯವಸ್ಥೆ, ಆನೆಗೊಂದಿ ರಸ್ತೆ ಸುಧಾರಣೆ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದರು.
  ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಮಾತನಾಡಿ, ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ  ಸಿದ್ಧತೆಗಳನ್ನು ಕೈಗೊಳ್ಳಲು ಸಾಕಷ್ಟು ಕಾಲಾವಕಾಶ ಇರುವುದರಿಂದ, ಸಮರ್ಪಕ ಸಿದ್ಧತೆ ಕೈಗೊಳ್ಳಲಾಗುವುದು.  ನೆರೆಹೊರೆಯ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಖ್ಯಾತ ಕಲಾವಿದರನ್ನು ಆಹ್ವಾನಿಸಲಾಗುವುದು.  ಉತ್ಸವವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಿ, ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗುವುದು ಎಂದರು.
  ಆನೆಗೊಂದಿ ಉತ್ಸವ ಹಂಪಿ ಉತ್ಸವದಷ್ಟೇ ವಿಜೃಂಭಣೆಯಿಂದ ಜರುಗಬೇಕು, ಸ್ಥಳೀಯ ಕಲಾವಿದರಿಗೆ, ಸಾಹಿತಿಗಳಿಗೆ, ಕವಿಗಳಿಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ, ಊಟದ ವ್ಯವಸ್ಥೆ ಕಲ್ಪಿಸಬೇಕು.  ಆನೆಗೊಂದಿ ಶಿಲ್ಪ ಕಲೆಗೆ ಖ್ಯಾತಿ ಹೊಂದಿದ್ದು, ಉತ್ಸವ ಸಂದರ್ಭದಲ್ಲಿ ಶಿಲ್ಪ ಕಲೆ ಶಿಬಿರ ಏರ್ಪಡಿಸಬೇಕು.  ಗ್ರಾಮದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು.  ಐತಿಹಾಸಿಕ ಸ್ಮಾರಕಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ಈ ಹಿಂದಿನ ಉತ್ಸವಗಳಲ್ಲಿ ಆದ ಲೋಪದೋಷಗಳು ಪುನರಾವರ್ತನೆಯಾಗದಂತೆ ಉತ್ಸವ ಅದ್ಧೂರಿಯಾಗಿ ಆಚರಣೆಯಾಬೇಕು ಎಂದು ಹಲವು ಗಣ್ಯರು, ಸಂಘಟನೆಗಳ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
  ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಗಂಗಾವತಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹನುಮಂತಪ್ಪ ನಾಯಕ್, ತಾ.ಪಂ. ಅಧ್ಯಕ್ಷೆ ಈರಮ್ಮ ಮುದಿಯಪ್ಪ, ಆನೆಗೊಂದಿ ಗ್ರಾ.ಪಂ. ಅಧ್ಯಕ್ಷ ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪಿ. ರಾಜಾ,   ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ತಹಸಿಲ್ದಾರ್ ವೆಂಕನಗೌಡ ಪಾಟೀಲ್, ಡಿವೈಎಸ್‌ಪಿ ವಿನ್ಸಂಟ್ ಶಾಂತಕುಮಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಜಿ.ಪಂ. ಸದಸ್ಯ ವಿಜಯಲಕ್ಷ್ಮಿ ರಾಮಕೃಷ್ಣ, ತಾಲೂಕು ಕಸಾಪ ಅಧ್ಯಕ್ಷ ಅಜ್ಮೀರ್ ನಂದಾಪುರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಾಧ್ಯಮದವರು ಅಲ್ಲದೆ ಸಾರ್ವಜನಿಕರು ಭಾಗವಹಿಸಿ, ಉತ್ಸವದ ಯಶಸ್ವಿಗೆ ಉಪಯುಕ್ತ ಸಲಹೆ ಸೂಚನೆ ನೀಡಿದರು.

Advertisement

0 comments:

Post a Comment

 
Top