PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೨೬ (ಕ ವಾ) ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನ. ೨೮ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
     ಭಕ್ತ ಕನಕದಾಸರ ಜಯಂತಿಯನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಈ ವರ್ಷದ ಜಯಂತಿಯನ್ನು ನ. ೨೮ ರಂದು ಆಚರಿಸಬೇಕಾಗಿರುತ್ತದೆ.  ಆದರೆ ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಪರಿಷತ್ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನ. ೨೪ ರಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ.  ಈ ಹಿನ್ನೆಲೆಯಲ್ಲಿ ಕನಕದಾಸರ ಜಯಂತಿಯ ದಿನದಂದು ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ವೇದಿಕೆ ಕಾರ್ಯಕ್ರಮವನ್ನು ಮಾತ್ರ ನ. ೨೮ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಕನಕ ಸಾಹಿತ್ಯಲೋಕ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ.
ಕೊಪ್ಪಳ ನ. ೨೬ (ಕ ವಾ) ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಬೆಂಗಳೂರು ಮತ್ತು ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕನಕ ಸಾಹಿತ್ ಲೋಕ ಪ್ರಬಂಧ ರಚನಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.
     ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ಹೆಸರು ಮತ್ತು ಶಾಲೆಯ ವಿವರ ಇಂತಿದೆ.  ಓಂಕಾರ, ಕೊಪ್ಪಳದ ಕಾಳಿದಾಸ ಪ್ರೌಢಶಾಲೆ  - ಪ್ರಥಮ.  ಸರೋಜ ಗೊಣ್ಣಾಗರ, ಆದರ್ಶ ವಿದ್ಯಾಲಯ, ಕುಷ್ಟಗಿ- ದ್ವಿತೀಯ.  ಶಿವಕುಮಾರ ಇಜೇರಿ, ಸ.ಪ.ಪೂ. ಕಾಲೇಜು, ಮಂಗಳೂರು- ತೃತೀಯ.  ಹಾಗೂ ಕೆ.ಬಿ. ಶ್ರೀಲಕ್ಷ್ಮಿ/ಕೆ.ಭೀಮಪ್ಪ, ಬೆತಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗಂಗಾವತಿ ಮತ್ತು ವಸಂತ/ಈರಪ್ಪ, ಆದರ್ಶ ವಿದ್ಯಾಲಯ, ಕನಕಗಿರಿ ಇವರಿಗೆ ಸಮಾಧಾನಕರ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.  ವಿಜೇತ ವಿದ್ಯಾರ್ಥಿಗಳಿಗೆ ನ. ೨೮ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಜರುಗುವ ಕನಕದಾಸರ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆ ವಿಮೆ ರೈತರಿಗೆ ಸೂಚನೆ.
ಕೊಪ್ಪಳ ನ. ೨೬ (ಕ ವಾ) ಕೃಷಿ ಇಲಾಕೆಯು ೨೦೧೫-೧೬ ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆ ವಿಮೆ ಕುರಿತು ರೈತರಿಗೆ ಸೂಚನೆಗಳನ್ನು ನೀಡಿದೆ.
     ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆಗೆ ಸಂಬಂಧಿಸಿದಂತೆ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಕಂತನ್ನು ತುಂಬಲು ಡಿಸೆಂಬರ್ ೩೧ ಕೊನೆಯ ದಿನಾಂಕವಾಗಿರುತ್ತದೆ.  ಪ್ರಸಕ್ತ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ಸಂಬಂಧಿಸಿದಂತೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರಿಗೆ ವಿಮಾ ಕಂತನ್ನು ತುಂಬಲು ೨೦೧೬ ರ ಫೆಬ್ರವರಿ ೨೯ ಕೊನೆಯ ದಿನಾಂಕವಾಗಿರುತ್ತದೆ.  ಬೆಳೆ ಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಬೆಳೆ ಸಾಲದ ಮೊತ್ತಕ್ಕೆ ರೈತರ ವಿಮಾ ಕಂತನ್ನು ಹೆಚ್ಚುವರಿಯಾಗಿ ಮಂಜೂರು ಮಾಡಲಾಗುವುದು.  ಈ ಯೋಜನೆಯಡಿ ಪಾಲ್ಗೊಳ್ಳುವ ರೈತರು ಬೆಳೆ ವಿಮೆ ಪ್ರೀಮಿಯಮ್ ತುಂಬಿ, ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.  ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ ಬ್ಯಾಂಕ್ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿಕೃಷಿ ನಿರ್ದೇಶಕ ಡಾ. ಎ. ರಾಮದಾಸ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top