PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜ. ೧೨ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಮುಂಬಡ್ತಿ ಪಡೆದು, ಬೆಂಗಳೂರಿಗೆ ವರ್ಗಾವಣೆಗೊಂಡ ಕೃಷ್ಣ ಉದಪುಡಿ ಅವರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಮಂಗಳವಾರದಂದು ಸನ್ಮಾನಿಸಿ, ಆತ್ಮೀಯವಾಗಿ ಬೀಳ್ಕೊಡಲಾಯಿತು.
       ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷ್ಣ ಉದಪುಡಿ ಅವರು, ತಮ್ಮ ಕೊಪ್ಪಳ ಜಿಲ್ಲೆಯಲ್ಲಿನ ಸೇವಾ ಅವಧಿಯಲ್ಲಿ ಶೌಚಾಲಯ ನಿರ್ಮಾಣ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.  ಸ್ವಚ್ಛ ಭಾರತ ನಿರ್ಮಾಣ ಕ್ಷೇತ್ರದಲ್ಲಿ ಕೊಪ್ಪಳ ಜಿಲ್ಲೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ.  ಇದೆಲ್ಲ ಸಾಧ್ಯವಾಗಿದ್ದು ಎಲ್ಲ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ.  ದಕ್ಷತೆ ಮತ್ತು ಪ್ರಾಮಾಣಿಕ ಸೇವೆಗೆ ಕೊಪ್ಪಳ ಜಿಲ್ಲೆಯ ಜನರ ಸಹಕಾರ ಪ್ರಮುಖವಾಗಿದೆ.  ಕೊಪ್ಪಳ ಜಿಲ್ಲೆಯಲ್ಲಿನ ಸೇವೆ ತಮ್ಮ ಜೀವನದಲ್ಲಿ ಎಂದೆಂದಿಗೂ ಮರೆಯುವ ಹಾಗಿಲ್ಲ.  ಇಲ್ಲಿನ ಜನರ ಪ್ರೀತಿ ವಿಶ್ವಾಸಕ್ಕೆ ಸದಾ ನಾನು ಋಣಿಯಾಗಿರುತ್ತೇನೆ ಎಂದು ಕೃಷ್ಣ ಉದಪುಡಿ ಅವರು ಹೇಳಿದರು.
      ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಿರುವ ಆರ್. ರಾಮಚಂದ್ರನ್ ಅವರಿಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಜಿಲ್ಲೆಗೆ ಸ್ವಾಗತಿಸಲಾಯಿತು.
      ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಮಾಜಿ ಅಧ್ಯಕ್ಷ ಜನಾರ್ಧನ ಹುಲಿಗಿ, ಜಿ.ಪಂ. ಸದಸ್ಯ ಈರಪ್ಪ ಕುಡಗುಂಟಿ, ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್ ಸೇರಿದಂತೆ ಹಲವರು ಕೃಷ್ಣ ಉದಪುಡಿ ಅವರ ಜಿಲ್ಲೆಯಲ್ಲಿನ ಸೇವೆ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್., ಸೇರಿದಂತೆ ಹಲವು ಅಧಿಕಾರಿ, ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಜಿಲ್ಲಾ ಪಂಚಾಯತಿ ಸದಸ್ಯರುಗಳು, ವಿವಿಧ ತಾಲೂಕುಗಳ ತಾ.ಪಂ. ಅಧ್ಯಕ್ಷರು, ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ. ಪಿಡಿಓಗಳು, ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top